May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವನಜ ರಂಗಮನೆ ಪ್ರಶಸ್ತಿಗೆ ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ಆಯ್ಕೆ

ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ. ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ಸದಾಶಿವ ಶೆಟ್ಟಿಗಾರರು ಯಕ್ಷದ್ರೋಣ ಬಣ್ಣದ ಮಾಲಿಂಗರಿಂದ ಬಣ್ಣಗಾರಿಕೆ ಹಾಗೂ ರೆಂಜಾಳ ರಾಮಕೃಷ್ಣ ರಾವ್ ಇವರಿಂದ ಹೆಜ್ಜೆಗಾರಿಕೆಯನ್ನು ಕಲಿತವರು. ತನ್ನ ಹದಿನಾರನೇ ವಯಸ್ಸಿಗೆ ಚೌಕಿಯ ನೇಪಥ್ಯ ಕಲಾವಿದರಾಗಿ ಸೇರಿಕೊಂಡ ಇವರು ಎರಡು ವರ್ಷದ ಬಳಿಕ ಬಣ್ಣದ ವೇಷಧಾರಿಯಾಗಿ ಕರಾವಳಿಯ ಪ್ರಸಿದ್ಧ ಯಕ್ಷಗಾನ ಮೇಳಗಳಾದ ಕಟೀಲು, ಎಡನೀರು, ಧರ್ಮಸ್ಥಳ ಮೇಳ, ಹೊಸನಗರ ಹಾಗೂ ಹನುಮಗಿರಿ ಮೇಳಗಳಲ್ಲಿ ಒಂದನೇ ವೇಷಧಾರಿಯಾಗಿ ಒಟ್ಟು 41 ವರ್ಷಗಳ ಸುಧೀರ್ಘ ಸೇವೆಗೈದವರು. ಸಾಂಪ್ರದಾಯಿಕ ಚೌಕಟ್ಟನ್ನು ಎಂದೂ ಮೀರದೆ ತನ್ನ ವಿಶಿಷ್ಠ ಬಣ್ಣಗಾರಿಕೆಯಿಂದಲೇ ಪ್ರಸಿದ್ಧರಾದ ಇವರು ದೇಶ ವಿದೇಶಗಳಲ್ಲಿ ಲಕ್ಷಾಂತರ ಅಭಿಮಾನಿ ಬಳಗವನ್ನು ಹೊಂದಿದ ಯಕ್ಷಗಾನದ ಅಗ್ರಮಾನ್ಯ ಬಣ್ಣದ ವೇಷಧಾರಿ ಎನಿಸಿದ್ದಾರೆ.

ರಾವಣ, ಕುಂಭಕರ್ಣ, ಮಹಿರಾವಣ, ಮಹಿಷಾಸುರ, ಕಾಕಾಸುರ, ವರಾಹ, ಸಿಂಹ, ಗಜೇಂದ್ರ ಮುಂತಾದ ಬಣ್ಣದ ವೇಷಗಳು ಅಲ್ಲದೆ ಅಜಮುಖಿ, ಶೂರ್ಪನಖಿ, ಪೂತನಿ, ವೃತ್ರ ಜ್ವಾಲೆ ಮುಂತಾದ ಹೆಣ್ಣು ಬಣ್ಣಗಳಿಗೆ ತನ್ನದೇ ಶೈಲಿಯಲ್ಲಿ ಜೀವ ಭಾವ ತುಂಬಿ ವಿಜೃಂಭಿಸಿ, ಬಣ್ಣದ ಮಾಂತ್ರಿಕರೆಂದೇ ಪ್ರಸಿದ್ಧಿ ಪಡೆದವರು. ನೂರಾರು ಪ್ರಶಸ್ತಿ ಸನ್ಮಾನಗಳಿಗೆ ಭಾಜನರಾದ ಯಕ್ಷರಂಗದ‍ ಅಪರೂಪದ ಕಲಾವಿದ.

ಪ್ರಶಸ್ತಿಯು ರೇಶ್ಮೆ ಶಾಲು, ಪ್ರಶಸ್ತಿ ಫಲಕ, ಸ್ಮರಣಿಕೆ, ಫಲಪುಷ್ಪ ಹಾಗೂ ರೂಪಾಯಿ 10 ಸಾವಿರ ನಗದು ಒಳಗೊಂಡಿರುತ್ತದೆ. ಅಕ್ಟೋಬರ್ 6ರಂದು ರಂಗಮನೆಯಲ್ಲಿ ನಡೆಯುವ ಯಕ್ಷ ಸಂಭ್ರಮದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ರಂಗಮನೆಯ ಅಧ್ಯಕ್ಷರಾದ ಡಾ| ಜೀವನ್ ರಾಂ ಸುಳ್ಯ  ತಿಳಿಸಿದ್ದಾರೆ.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page