May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉದ್ವಿಗ್ನವಾದ ಬಂಟ್ವಾಳ ಬಿ.ಸಿ. ರೋಡ್ ಪೊಲೀಸರ ಹರ ಸಾಹಸದಲ್ಲಿ ಮಧ್ಯಾಹ್ನದ ವೇಳೆ ಶಾಂತ ಪರಿಸ್ಥಿತಿಗೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಇವರಿಬ್ಬರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ ನಲ್ಲಿ ಇಂದು ಸೋಮವಾರ ಬೆಳಗ್ಗೆ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಪೊಲೀಸರ ಹರ ಸಾಹಸದಲ್ಲಿ ಮದ್ಯಾಹ್ನದ ವೇಳೆಗೆ ತಿಳಿಯಾಗಿದೆ.

ಸಂಘಪರಿವಾರದ ಬಿ‌.ಸಿ. ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಬಿ.ಸಿ. ರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ ಕಾರ್ಯಕರ್ತರು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮುಹಮ್ಮದ್ ಶರೀಫ್ ವಿರುದ್ಧ ಘೋಷಣೆ ಕೂಗುತ್ತಾ ಮುಂದೆ ಸಾಗಲು ಮುಂದಾದಾಗ ಅವರನ್ನು ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕಾಟ ತಲ್ಲಾಟ ನಡೆಯಿತು. ಪರಿಸ್ಥಿತಿ ಕೈ ಮೀರಿಹೋಗುವ ಹಂತಕ್ಕೆ ತಲುಪಿದಾಗ ಪೋಲೀಸರು ಬಸ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟು ತಡೆಯೊಡ್ಡಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯವಾಹ ಶರಣ್ ಪಂಪ್ವೆಲ್ ಮಾತನಾಡಿ, ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಅವರ ಸವಾಲು ಸ್ವೀಕರಿಸಿ ಬಿ.ಸಿ. ರೋಡ್ ಬಂದಿದ್ದೇನೆ. ಇನ್ನೂ ಮುಂದೆಯೂ ಇಂತಹ ಸವಾಲು ಸ್ವೀಕರಿಸಲು ತಯಾರಾಗಿದ್ದೇವೆ. ಮುಂದೆ ಅವಶ್ಯಕತೆ ಬಿದ್ದರೆ ಆತ ಹೇಳಿದಂತೆ ಮಸೀದಿಗೆ ಹೋಗುವುದಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಸಿದ ಅವರು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಹಿಂದುತ್ವಕ್ಕೆ ಜಯಸಿಕ್ಕಿದೆ. ಇಂತಹ ಸವಾಲುಗಳು ಹಿಂದೂ ಕಾರ್ಯಕರ್ತರಿಗೆ ಇದೇ ಮೊದಲಲ್ಲ, ಸಾಕಷ್ಟು ಕಾರ್ಯಕರ್ತರು ಪ್ರಾಣವನ್ನು ಕೊಟ್ಟಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡು ಜೈಲಿಗೂ ಹೋಗಿದ್ದಾರೆ ಎಂದರು.

 

ಬಳಿಕ ಹೆದ್ದಾರಿಯಲ್ಲಿ ಕೆಲಹೊತ್ತು ಕಾರ್ಯಕರ್ತರು ಘೋಷಣೆ ಕೂಗಿದರು. ಸಂಘದ ಪರಿವಾರದ ಪ್ರಮುಖರಾದ ಪುನೀತ್ ಅತ್ತಾವರ, ಆರ್. ಚೆನ್ನಪ್ಪ ಕೋಟ್ಯಾನ್, ಎ. ಗೋವಿಂದ ಪ್ರಭು, ಪ್ರಸಾದ್ ಕುಮಾರ್ ರೈ ಬಂಟ್ವಾಳ, ಭಾಸ್ಕರ್ ಧರ್ಮಸ್ಥಳ, ನವೀನ್ ನೆರಿಯಾ, ಭುಜಂಗ ಕುಲಾಲ್, ಗುರುರಾಜ್ ಬಂಟ್ವಾಳ, ನರಸಿಂಹ ಮಾಣಿ, ಮಹೇಶ್ ಬೈಲೂರು, ಕೃಷ್ಣಪ್ರಸಾದ್, ಮಿಥುನ್ ಕಲ್ಲಡ್ಜ, ನವೀನ್ ಮೂಡುಶೆಡ್ಡೆ, ಸಚಿನ್ ಮೆಲ್ಕಾರ್,  ದಿನೇಶ್ ಅಮ್ಟೂರು, ಸಂದೇಶ್ ಶೆಟ್ಟಿ ಅರೆಬೆಟ್ಟು,  ಪುರುಷೋತ್ತಮ ಸಾಲಿಯಾನ್, ರಾಮ್ ದಾಸ್ ಬಂಟ್ವಾಳ ಮತ್ತಿತರರು ಭಾಗವಹಿಸಿದ್ದರು .

 

ಐಜಿಪಿ ಅಮಿತ್ ಸಿಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಎ.ಸಿ. ಹರ್ಷವರ್ದನ್, ತಹಶಿಲ್ದಾರ್ ಅರ್ಚನಾ ಭಟ್ ಅವರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿ ಬಿ.ಸಿ. ರೋಡ್ ಪರಿಸರದಲ್ಲಿ ಬಿಗಿ  ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಈ ನಡುವೆ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ  ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದ್ದು ಅವರನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಕೂಡಾ ಮಂಗಳೂರು ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಸಿ. ರೋಡ್ ಸಮೀಪದ ಆಸುಪಾಸಿನ ವಿವಿದೆಡೆಗಳಲ್ಲಿ ಮಿಲಾದ್ ಕಾರ್ಯಕ್ರಮಗಳು ಯಾವುದೇ ರೀತಿಯ ಗೊಂದಲ ಮತ್ತು ಅಶಾಂತಿಗೆ ಅವಕಾಶ ನೀಡದೆ ಶಾಂತಿಯುತವಾಗಿ ಯಶಸ್ವಿಯಾಗಿ ನಡೆಯಿತು.

You may also like

News

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ MLC ಐವನ್ ಡಿಸೋಜ

ಕರಾವಳಿ ಕರ್ನಾಟಕದ ಜನರ ದಶಕಗಳ ಬೇಡಿಕೆಯಾಗಿರುವ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪಿಸುವ ಪ್ರಕ್ರಿಯೆಗೆ ವೇಗ ನೀಡುವ ನಿಟ್ಟಿನಲ್ಲಿ, ಹೋರಾಟ ಸಮಿತಿಯ ಸಂಚಾಲಕ ಹಾಗೂ ಶಾಸಕ MLC
News

ICYM BORIMAR ಸಂಘಟನೆಯಲ್ಲಿ ‘ಕುಟುಂಬ ರಾಜಕಾರಣ’?: ಯಾರಿಗೂ ತಿಳಿಸದೇ ಒಳಗಿಂದೊಳಗೆ ಚುನಾವಣೆ ನಡೆಸಿದ ಸಚೇತಕ! ಭುಗಿಲೆದ್ದ ಆಕ್ರೋಶ

ಮಂಗಳೂರು ಧರ್ಮಾಧ್ಯಕ್ಷರಿಗೆ ಲಿಖಿತ ದೂರು ನೀಡಿದ ಚರ್ಚ್ ಹಿಂದಿನ ಪಾಲನಾ ಸಮಿತಿ ಕ್ರೈಸ್ತ ಯುವಜನರ ಪ್ರತಿಷ್ಠಿತ ಸಂಘಟನೆಯಾದ ICYM ಬೊರಿಮಾರ್ (BORIMAR) ಘಟಕದಲ್ಲಿ ಸಚೇತಕನು (ANIMATOR) ಧರ್ಮಕ್ಷೇತ್ರದ

You cannot copy content of this page